ಖಾಸಗಿ ಅನುದಾನ ರಹಿತ ಶಿಕ್ಷಕರಿಗೆ ಸರಕಾರದಿಂದ ಪ್ಯಾಕೇಜ್ ಘೋಷಣೆ; ಹೊರಟ್ಟಿ ಅಭಿನಂದನೆ

varthajala
0

ಖಾಸಗಿ ಅನುದಾನ ರಹಿತ ಶಿಕ್ಷಕರಿಗೆ ಸರಕಾರದಿಂದ ಪ್ಯಾಕೇಜ್ ಘೋಷಣೆ
ತಮ್ಮ ಬೇಡಿಕೆ ಈಡೇರಿಸಿದ್ದಕ್ಕೆ ಸಭಾಪತಿ ಶ್ರೀ ಬಸವರಾಜ ಹೊರಟ್ಟಿ ಅವರಿಂದ ಮುಖ್ಯಮಂತ್ರಿಯವರಿಗೆ ಅಭಿನಂದನೆ


 
ಜಾಗತಿಕ ಮಹಾಮಾರಿ ಕೋವಿಡ್‍ದಿಂದ ತೀವ್ರ ಸಂಕಷ್ಟ ಎದುರಿಸುತ್ತಿರುವ ಖಾಸಗಿ ಅನುದಾನ ರಹಿತ ಶಾಲಾ ಕಾಲೇಜುಗಳ ಶಿಕ್ಷಕರು ಮತ್ತು ಉಪನ್ಯಾಸಕರುಗಳಿಗೆ ವಿಶೇಷ ಪ್ಯಾಕೇಜ್ ಒದಗಿಸುವಂತೆ ಕಳೆದ ವರ್ಷದಿಂದ ಹಲವಾರು ಬಾರಿ ಮುಖ್ಯಮಂತ್ರಿಗಳಿಗೆ ಒತ್ತಾಯಿಸುತ್ತಿದ್ದು ತಮ್ಮ ಮನವಿಗೆ ಮುಖ್ಯ ಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ವಿಧಾನ ಪರಿಷತ್ತಿನ ಸಭಾಪತಿ ಶ್ರೀ ಬಸವರಾಜ ಹೊರಟ್ಟಿ ಹೇಳಿದರು.
ಇಂದು ಹುಬ್ಬಳ್ಳಿಯ ಪ್ರವಾಸಿ ಮಂದಿರದಲ್ಲಿ ತಮ್ಮನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಶ್ರೀ ಬಿ.ಎಸ್.ಯಡಿಯೂರಪ್ಪನವರಿಗೆ ಅಭಿನಂದನೆ ಸಲ್ಲಿಸಿದ ಸಭಾಪತಿ ಶ್ರೀ ಬಸವರಾಜ ಹೊರಟ್ಟಿಯವರು ಕಳೆದ ಬಾರಿಯ ಕೋವಿಡ್ ಸಂದರ್ಭದಿಂದ ಖಾಸಗಿ ಅನುದಾನ ರಹಿತ ಶಾಲಾ ಕಾಲೇಜುಗಳ ಶಿಕ್ಷಕರು ಮತ್ತು ಉಪನ್ಯಾಸಕರುಗಳಿಗೆ ವಿಶೇಷ ಪ್ಯಾಕೇಜ್ ನೀಡಿ ಅವರಿಗೆ ಸರಕಾರ ಸೂಕ್ತ ಸಹಾಯ ಕಲ್ಪಿಸುವಂತೆ ಹಲವು ಬಾರಿ ಒತ್ತಾಯಿಸಿದ್ದನ್ನು ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಶ್ರೀ ಬಿ.ಎಸ್.ಯಡಿಯೂರಪ್ಪನವರು ಮಾನ್ಯ ಸಭಾಪತಿಗಳು ತಮಗೆ ಸಲಹೆ ರೂಪದಲ್ಲಿ ನೀಡಲಾದ ಹಲವಾರು ಬೇಡಿಕೆಗಳನ್ನು ಈಡೇರಿಸಲಾಗಿದೆ. ಸಭಾಪತಿಗಳು ಸೂಚಿಸಿದಂತೆ ಎಲ್ಲಾ ಶಿಕ್ಷಕರನ್ನು ಫ್ರಂಟ್ ಲೈನ್ ವಾರಿಯರ್ಸ್ ಎಂದು ಘೋಷಿಸಲಾಗಿದೆ ಹಾಗೂ ಅವರಿಗೆ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ನೀಡಲಾಗುತ್ತಿದೆ. ತೀವ್ರ ಸಂಕಷ್ಟದಲ್ಲಿರುವ ಖಾಸಗಿ ಅನುದಾನ ರಹಿತ ಶಾಲಾ ಕಾಲೇಜುಗಳ ಶಿಕ್ಷಕರು ಮತ್ತು ಉಪನ್ಯಾಸಕರುಗಳಿಗೆ ಸಹಾಯಧನ ನೀಡಬೇಕೆಂದು ತಾವೇ ಮೊದಲ ಬಾರಿಗೆ ನನ್ನನ್ನು ಹಲವಾರು ಬಾರಿ ಖುದ್ದಾಗಿ ಹಾಗೂ ಪತ್ರದ ಮೂಲಕ ಒತ್ತಾಯಿಸಿದ್ದು ತಮ್ಮ ಒತ್ತಾಸೆಯಂತೆ ಕೂಡಲೇ ಸ್ಪಂದಿಸಿ ರೂ. 5 ಸಾವಿರ ಪರಿಹಾರಧನ ಬಿಡುಗಡೆ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಸಭಾಪತಿಗಳು ಈಗಾಗಲೇ ಸೂಚಿಸಿರುವಂತೆ ಎಲ್ಲ ಶಿಕ್ಷಕರಿಗೆ ಆದ್ಯತೆ ಮೇರೆಗೆ ಲಸಿಕೆ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಅಲ್ಲದೇ ಸಭಾಪತಿಗಳ ಸಲಹೆಯಂತೆ ಬ್ಲ್ಯಾಕ್ ಫಂಗಸ್‍ದಿಂದ ಬಳಲುತ್ತಿರುವ ರೋಗಿಗಳಿಗೆ ಸರಕಾರದಿಂದಲೇ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ. ಮುಂಬರುವ ಕೋವಿಡ್ ಮೂರನೇ ಅಲೆಯ ಸಂದರ್ಭದಲ್ಲಿ ಮಕ್ಕಳಿಗಾಗುವ ತೊಂದರೆಗಳ ಕುರಿತು ತಜ್ಞರ ಸಮಿತಿ ನೇಮಕ ಮಾಡಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಚರ್ಚೆಯ ಮಧ್ಯೆ ಪ್ರವೇಶಿಸಿದ ಸಭಾಪತಿ ಶ್ರೀ ಬಸವರಾಜ ಹೊರಟ್ಟಿ ಅನುದಾನ ರಹಿತ ಶಾಲಾ ಕಾಲೇಜುಗಳ ಶಿಕ್ಷಕರು ಹಾಗೂ ಉಪನ್ಯಾಸಕರುಗಳಿಗೆ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಪ್ಯಾಕೇಜ್ ಘೋಸಿಸಬೇಕು ಹಾಗೂ ಕೋವಿಡ್ ಕರ್ತವ್ಯದ ಸಂದರ್ಭದಲ್ಲಿ ಮರಣ ಹೊಂದಿದ ಶಿಕ್ಷಕರ ಕುಟುಂಬಕ್ಕೆ ಸರಕಾರಿ ನೌಕರಿ ನೀಡಬೇಕೆಂದು ಹಾಗೂ ಸೂಕ್ತ ಪರಿಹಾರ ಘೋಷಿಸುವಂತೆ ಸಲಹೆ ಮಾಡಿದರು. ಅವುಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.
ಈಗ ಘೋಷಿಸಿರುವ ಖಾಸಗಿ ಅನುದಾನ ರಹಿತ ಶಾಲಾ ಕಾಲೇಜುಗಳ ಶಿಕ್ಷಕರು ಹಾಗೂ ಉಪನ್ಯಾಸಕರುಗಳಿಗೆ ನೀಡಿರುವ ಪ್ಯಾಕೇಜ್‍ನ್ನು ಸ್ವಾಗತಿಸಲಾಗುವುದೆಂದು ಮುಖ್ಯಮಂತ್ರಿಗಳಿಗೆ ತಿಳಿಸಿದ ಸಭಾಪತಿ ಶ್ರೀ ಬಸವರಾಜ ಹೊರಟ್ಟಿ ಇಷ್ಟೇ  ಪ್ಯಾಕೇಜ್ ಸಾಲದು ಇನ್ನೂ ಹೆಚ್ಚಿನ ಸಹಾಯಧನ ನೀಡುವಂತೆ ಮುಖ್ಯಮಂತ್ರಿಗಳನ್ನು ಕೋರಿದರು.
ರಾಜ್ಯದಲ್ಲಿರುವ ಖಾಸಗಿ ಅನುದಾನ ರಹಿತ ಶಾಲಾ ಕಾಲೇಜುಗಳ ಶಿಕ್ಷಕರು ಹಾಗೂ ಉಪನ್ಯಾಸಕರುಗಳಿಗೆ ಅಗತ್ಯ ಪ್ಯಾಕೇಜ್ ಹಾಗೂ ಎಲ್ಲ ರೀತಿಯ ಸೌಲಭ್ಯಗಳನ್ನು ನೀಡುವಂತೆ ಮುಖ್ಯಮಂತ್ರಿಗಳೂ ಸೇರಿದಂತೆ ಉಪಮುಖ್ಯಗಳಾದ ಡಾ. ಅಶ್ವಥ ನಾಯಾರಾಣ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಶ್ರೀ ಸುರೇಶ ಕುಮಾರ ಅವರಿಗೂ ಹಲವು ಬಾರಿ ಪತ್ರ ಬರೆದು ಈ ಹಿಂದೆ ಕೋರಿದ್ದಾಗಿ ಮುಖ್ಯಮಂತ್ರಿಗಳಿಗೆ ಸಭಾಪತಿ ಶ್ರೀ ಬಸವರಾಜ ಹೊರಟ್ಟಿ ಅವರು ತಿಳಿಸಿದರು.

Tags

Post a Comment

0Comments

Post a Comment (0)