ಮಕ್ಕಳು ಶಿಕ್ಷಣದಿಂದ‌ ವಂಚಿತರಾಗಲು ಬಿಡುವುದಿಲ್ಲ* *ಅಬಕಾರಿ ಸಚಿವ ಕೆ.ಗೋಪಾಲಯ್ಯ ಭರವಸೆ*

varthajala
0

 ಬೆಂಗಳೂರು.ಜೂ.17; ಮಹಾಲಕ್ಷ್ಮಿ ಲೇ ಔಟ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಯಾವ ಮಕ್ಕಳೂ ಕೂಡ ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ದೂರದೃಷ್ಟಿಯಿಂದ ಕ್ಷೇತ್ರದಲ್ಲಿ ನಾಲ್ಕು ಕಡೆಗಳಲ್ಲಿ ದೆಹಲಿ ಮಾದರಿಯ ಸರ್ಕಾರಿ ಶಾಲೆಗಳನ್ನು ನಿರ್ಮಾಣ ಮಾಡಲಾಗಿದ್ದು ಇಲ್ಲಿನ ಆರು ಸಾವಿರ ವಿದ್ಯಾರ್ಥಿಗಳಿಗೆ ಮಹಾಲಕ್ಷ್ಮಿ ಎಜುಕೇಷನ್ ಟ್ರಸ್ಟ್ ವತಿಯಿಂದ ಸಂಪೂರ್ಣ ಉಚಿತ ಶಿಕ್ಷಣ ನೀಡುವುದಾಗಿ ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು.

ಮಹಾಲಕ್ಷ್ಮಿ ಎಜುಕೇಶನಲ್ ಟ್ರಸ್ಟ್  ಮತ್ತು ಶಿಕ್ಷಣ ಇಲಾಖೆ ಸಹಯೋಗದಲ್ಲಿ ಶುಕ್ರವಾರ ಸಂಜೆ 

 ನಾಗಪುರ ವಾರ್ಡ್ ನಲ್ಲಿರುವ  ಸಚಿವರ  ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ  ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಹಾಲಕ್ಷ್ಮಿ ಲೇ ಔಟ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಮಲಾನಗರದ ಅಟಲ್ ಬಿಹಾರಿ ವಾಜಪೇಯಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಮತ್ತು ನಂದಿನಿ ಬಡಾವಣೆಯ ಕೃಷ್ಣಾ ನಂದ ನಗರದ ಕರ್ನಾಟಕ ಪಬ್ಲಿಕ್ ಶಾಲೆ ಸೇರಿದಂತೆ ಕ್ಷೇತ್ರ ವ್ಯಾಪ್ತಿಯಲ್ಲಿ ನಾಲ್ಕು  ದೆಹಲಿ ಮಾದರಿಯ ಶಾಲೆಗಳನ್ನು ಆರಂಭಿಸಲಾಗಿದ್ದು, ಇಲ್ಲಿನ ಎಲ್ಲ ಮಕ್ಕಳು ಶಾಲೆಗೆ ಹೆಸರು ಬರುವಂತೆ ಅಭ್ಯಾಸ ಮಾಡುತ್ತಿದ್ದಾರೆ ಎಂದರು.

ಕ್ಷೇತ್ರದ ಮಕ್ಕಳಿಗೆ ಪಿಯುಸಿವರೆಗೂ ಉಚಿತ ಶಿಕ್ಷಣ, ಸಮವಸ್ತ್ರ, ಶೂ ಸೇರಿದಂತೆ ಶಿಕ್ಷಣಕ್ಕೆ ಬೇಕಾದ ಎಲ್ಲ ಅಗತ್ಯ ನೆರವನ್ನು ನಾನು ಮತ್ತು ನನ್ನ ಕುಟುಂಬ ಜೀವನದ ಕಡೆಯವರೆಗೂ ನಡೆಸಿಕೊಂಡುಬರುತ್ತೇವೆ ಎಂದು ತಿಳಿಸಿದರು.

ಕೇಂದ್ರದಲ್ಲಿರುವ ನಮ್ಮದೇ ಸರ್ಕಾರ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತಂದಿದ್ದು,ಈ ಮೂಲಕ ದೇಶದ ಮಕ್ಕಳ ಭವಿಷ್ಯವನ್ನು ಬದಲಿಸುವ ನಿಟ್ಟಿನಲ್ಲಿ ಸಂಕಲ್ಪ ಮಾಡಲಾಗಿದೆ.‌ಇಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ಮಾದರಿ ಶಾಲೆಯಲ್ಲಿ ಪಿಯುಸಿ ತನಕ ಶಿಕ್ಷಣ ನೀಡುವಂತೆ ಮಾಡಲಾಗುವುದು.ಇದಕ್ಕೆ ಅಗತ್ಯವಾಗಿರುವ ಕೊಠಡಿ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗುವುದು ಎಂದರು.



ಈಗಾಗಲೇ ಕ್ಷೇತ್ರದ ಆರು ಸಾವಿರ ಮಕ್ಕಳಿಗೆ ಸರ್ಕಾರಿ ಶಾಲೆಯಲ್ಲಿ ಪ್ರವೇಶ‌ ಕಲ್ಪಿಸಲಾಗಿದೆ.ಈ ಮೂಲಕ ಮಧ್ಯಮ‌ ಮತ್ತು ಬಡ ವರ್ಗದ ಪೋಷಕರು ಮತ್ತು ಮಕ್ಕಳ‌ ಶಿಕ್ಷಣದ ಕನಸನ್ನು ನನಸು ಮಾಡಲಾಗುವುದು ಎಂದರು

ಈ ಸಂದರ್ಭದಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್,ಸಂಸದ ಡಿ.ವಿ.ಸದಾನಂದ ಗೌಡ,ಬಿಬಿಎಂಪಿ ಮಾಜಿ ಉಪಮೇಯರ್ ಹೇಮಲತಾ ಕೆ ಗೋಪಾಲಯ್ಯ, ಮಹಾಲಕ್ಷ್ಮಿ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಜಯರಾಮಯ್ಯ ಬಿಬಿಎಂಪಿ ಮಾಜಿ ಉಪಮೇಯರ್ ಹರೀಶ್ ಮಂಡಲದ ಅಧ್ಯಕ್ಷ ರಾಘವೇಂದ್ರ ಶೆಟ್ಟಿ ಇತರರು ಉಪಸ್ಥಿತರಿದ್ದರು.

Post a Comment

0Comments

Post a Comment (0)