ಸಂಕಷ್ಟದಲ್ಲಿನ ಮಕ್ಕಳನ್ನು ರಕ್ಷಿಸಿ ಅವರಿಗೆ ಸೂಕ್ತ ಪುನರ್ವಸತಿ ಕಲ್ಪಿಸಿ ಮುಖ್ಯವಾಹಿನಿಗೆ ಸೇರಿಸುವಲ್ಲಿ ಮಕ್ಕಳ ರಕ್ಷಣಾ ವ್ಯವಸ್ಥೆಯಲ್ಲಿರುವ ಎಲ್ಲಾ ಭಾಗೀದಾರರು ಸಮನ್ವಯದಿಂದ ಕೆಲಸ ಮಾಡುವ ಅಗತ್ಯವಿದೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ತಿಪ್ಪೇಸ್ವಾಮಿ ಕೆ.ಟಿ. ತಿಳಿಸಿದರು.
ಅವರು ತುಮಕೂರಿನ ಬಾಲ ಮಂದಿರದಲ್ಲಿ ನಡೆದ ಮಕ್ಕಳ ಕಲ್ಯಾಣ ಸಮಿತಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ ಹಾಗೂ ಬಾಲಮಂದಿರಗಳ ಸಿಬ್ಬಂಧಿಗಳು ಹಾಗೂ ಅಧಿಕಾರಿಗಳ ಸಮನ್ವಯ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
ರಾಜ್ಯದಲ್ಲಿ ದೊಡ್ಡ ಜಿಲ್ಲೆಗಳಲ್ಲಿ ಒಂದಾದ ತುಮಕೂರು ಜಿಲ್ಲೆಯಲ್ಲಿ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು, ಅಪ್ರಾಪ್ತ ಹೆಣ್ಣು ಮಕ್ಕಳ ಗರ್ಭಧಾರಣೆ ಪ್ರಕರಣಗಳು, ಮಕ್ಕಳ ಅಪೌಷ್ಟಿಕತೆ, ಇತ್ಯಾದಿ ಸವಾಲುಗಳು ಮಕ್ಕಳನ್ನು ಕಾಡುತ್ತಿದ್ದು ಇದಕ್ಕೆ ಪರಿಣಾಮಕಾರಿ ಕಾರ್ಯಾಚರಣೆ ಮಾಡಲು ಹಾಗೂ ಸಂತ್ರಸ್ಥ ಮಕ್ಕಳಿಗೆ ಸಕಾಲಿಕ ನ್ಯಾಯದಾನ ಹಾಗೂ ಪುನರ್ವಸತಿ ಕಲ್ಪಿಸಲು ಎಲ್ಲರ ಸಂಘಟಿತ ಪ್ರಯತ್ನ ಅತ್ಯಾವಶ್ಯಕ. ಈ ನಿಟ್ಟಿನಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂಧಿಗಳು ಪರಸ್ಪರ ಸಹಕಾರ ಮತ್ತು ಬದ್ದತೆಯಿಂದ ಕೆಲಸ ಮಾಡಬೇಕಿದೆ ಎಂದರು. ಇದಕ್ಕಾಗಿ ಪ್ರತೀ ಮೂರು ತಿಂಗಳಿಗೊಮ್ಮೆ ಸಮನ್ವಯ ಸಭೆ ನಡೆಸಿ ಪ್ರಗತಿ ಪರಿಶೀಲನೆಗೆ ಕ್ರಮವಹಿಸುವಂತೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಸೂಚಿಸಿದರು.
ಸಭೆಯಲ್ಲಿ ಹಾಜರಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀ ಚೇತನ್ ಕುಮಾರ್ ಮಾತನಾಡಿ ಜಿಲ್ಲೆಯಲ್ಲಿ ಮಕ್ಕಳ ಹಕ್ಕುಗಳನ್ನು ರಕ್ಷಿಸಲು ಯೋಜಿತ ಕಾರ್ಯಚಟುವಟಿಕೆಗಳು ಹಾಗೂ ವ್ಯಾಪಕ ಅರಿವು ಕಾರ್ಯಾಗಾರಗಳು ಅತ್ಯಗತ್ಯ. ಮಕ್ಕಳಲ್ಲಿ ಮೊಬೈಲ್ ಬಳಕೆ ಹೆಚ್ಚುತ್ತಿದ್ದು ಇದು ಮಕ್ಕಳ ಆರೋಗ್ಯದ ಮೇಲಷ್ಟೇ ಅಲ್ಲದೇ ದೌರ್ಜನ್ಯಕ್ಕೂ ಕಾರಣವಾಗುತ್ತಿದೆ. ಇದನ್ನು ತಡೆಯುವ ನಿಟ್ಟಿನಲ್ಲಿ ಮಕ್ಕಳ ರಕ್ಷಣಾ ಘಟಕ ಮತ್ತಷ್ಟು ಚುರುಕಾಗಿ ಕೆಲಸ ಮಾಡಬೇಕೆಂದರು.
ನೂತನವಾಗಿ ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯರಾಗಿ ನೇಮಕವಾದ ಶ್ರೀಮತಿ ಸೌಮ್ಯ, ಶ್ರೀಮತಿ ಆಶಾ ಹಾಗೂ ಡಾ.ಟವಿಕುಮಾರ್ ರವರನ್ನು ಸ್ವಾಗತಿಸಿದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಶ್ರೀ ದಿನೇಶ್ ರವರು ಎಲ್ಲರೂ ಜೊತೆಗೂಡಿ ತುಮಕೂರು ಜಿಲ್ಲೆಯಲ್ಲಿ ಮಕ್ಕಳ ರಕ್ಷಣಾ ವ್ಯವಸ್ಥೆಯನ್ನು ಬಲಪಡಿಸೋಣ ಎಂದರು.
ಸದರಿ ಸಭೆಯಲ್ಲಿ ರಕ್ಷಣಾಧಿಕಾರಿಗಳಾದ ಶ್ರೀ ಶಿವಣ್ಣ, ಶ್ರೀ ಗೌತಮ್ ಹಾಗೂ ಮಕ್ಕಳ ಸಹಾಯವಾಣಿ ಸಂಯೋಜಕಿ ಅನುಷಾ ಹಾಗೂ ಇನ್ನಿತರೆ ಅಧಿಕಾರಿ ಸಿಬ್ಬಂದಿಗಳು ಹಾಜರಿದ್ದರು.