ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ಬೆಂಗಳೂರಿನಲ್ಲಿ ಕ್ವಾಂಟಮ್ ಕ್ಲಸ್ಟರ್ ಆರಂಭಿಸಲಾಗುತ್ತಿದ್ದು, ಶೀಘ್ರವೇ ಬೆಂಗಳೂರು ಕ್ವಾಂಟಮ್ ತಂತ್ರಜ್ಞಾನದ ರಾಜಧಾನಿಯಾಗಲಿದೆ ಎಂದು ತಿಳಿಸಿದರು.
ಮೊದಲ ಆವೃತ್ತಿಯ ಕ್ವಾಂಟಮ್ ಇಂಡಿಯಾ ಬೆಂಗಳೂರು ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದಕ್ಕೆ ಬಹಳ ಸಂತೋಷವಾಗಿದೆ. ತಂತ್ರಜ್ಞಾನವೇ ಭವಿಷ್ಯ. ಕರ್ನಾಟಕ ಅತ್ಯಂತ ಪ್ರತಿಭಾವಂತ ಮಾನವ ಸಂಪನ್ಮೂಲ ಹೊಂದಿರುವ ರಾಜ್ಯ. ಇಲ್ಲಿನ ಮಾನವ ಸಂಪನ್ಮೂಲಕ್ಕೆ ದೇಶದ ಯಾವುದೇ ಇತರೆ ನಗರಗಳು ಅಥವಾ ರಾಜ್ಯ ಪೈ¥ÉÆÃಟಿ ನೀಡಲು ಸಾಧ್ಯವಿಲ್ಲ. ನಾವು ನಮ್ಮ ನೆರೆ ರಾಜ್ಯಗಳ ಜೊತೆಗೆ ಮಾತ್ರ ಸ್ಪರ್ಧೆ ಮಾಡುತ್ತಿಲ್ಲ. ಬದಲಿಗೆ ಜಾಗತಿಕ ಮಟ್ಟದಲ್ಲಿ ಬೇರೆ ದೇಶಗಳ ಜೊತೆ ಸ್ಪರ್ಧೆ ಮಾಡುತ್ತಿದ್ದೇವೆ ಎಂದು ತಿಳಿಸಿದರು.
ನಾವು ಬೆಂಗಳೂರಿನಲ್ಲಿ ಭದ್ರ ಬುನಾದಿ ನಿರ್ಮಿಸಿದ್ದು, ಹೀಗಾಗಿ ವಿಶ್ವದ ಎಲ್ಲಾ ಕಡೆಯಿಂದ ಜನರು ಇಲ್ಲಿಗೆ ಆಕರ್ಷಿತರಾಗಿ ಬರುತ್ತಿದ್ದಾರೆ. ನಿಮಗೆ ಅಗತ್ಯವಿರುವ ಬೆಂಬಲವನ್ನು ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ. 20 ವರ್ಷಗಳ ಹಿಂದೆ ಎಸ್.ಎಂ ಕೃಷ್ಣ ಅವರ ಸರ್ಕಾರದಲ್ಲಿ ನಾನು ನಗರಾಭಿವೃದ್ಧಿ ಸಚಿವನಾಗಿದ್ದಾಗ ನೂತನವಾದ ಐಟಿ ನೀತಿ ಜಾರಿಗೆ ತಂದೆವು. ಅದರ ಪರಿಣಾಮವಾಗಿ ಇಂದು ಬೆಂಗಳೂರು ಬೆಳೆದಿದೆ. ವಿಶ್ವ ಬೆಂಗಳೂರಿನತ್ತ ತಿರುಗಿ ನೋಡುತ್ತಿದೆ. ಇದು ನಮ್ಮ ಶಕ್ತಿ ಎಂದು ಹೇಳಿದರು.
ನಮ್ಮ ಎರಡು ಹಾಗೂ ಮೂರನೇ ಹಂತದ ನಗರಗಳು ಕೂಡ ಅತ್ಯುತ್ತಮ ಮಾನವ ಸಂಪನ್ಮೂಲ ಹಾಗೂ ಮೂಲಸೌಕರ್ಯ ನೀಡಲಿದ್ದು, ನೀವು ಈ ಭಾಗಗಳತ್ತ ಗಮನಹರಿಸಬಹುದು. ನಮ್ಮ ರಾಜ್ಯದಲ್ಲಿ ಸುಮಾರು 300ಕ್ಕೂ ಹೆಚ್ಚು ಇಂಜಿನಿಯರಿಂಗ್ ಕಾಲೇಜು ಹೊಂದಿದೆ. ದಶಕಗಳ ಹಿಂದೆಯೇ ಭಾರತೀಯ ವಿಜ್ಞಾನ ಸಂಸ್ಥೆ ನಮ್ಮಲ್ಲಿ ಆರಂಭವಾಗಿತ್ತು. ಜವಾಹರ್ ಲಾಲ್ ನೆಹರೂ ಅವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಸಾರ್ವಜನಿಕ ಉದ್ದಿಮಗಳನ್ನು ಆರಂಭಿಸಿ ಹೊಸ ಕ್ರಾಂತಿ ಆರಂಭಿಸಲಾಯಿತು. ಹೀಗಾಗಿ ನಾವು ಬಲಿಷ್ಠವಾಗಿ ಬೆಳೆದಿದ್ದೇವೆ ಎಂದರು.
ನಾವೆಲ್ಲರೂ ಸೇರಿ ಇಂದಿನಿಂದಲೇ ಕ್ವಾಂಟಮ್ ಯುಗದತ್ತ ಸಾಗೋಣ. ಈ ಕ್ಷೇತ್ರದಿಂದ ಸಾರ್ವಜನಿಕರ ಉದ್ದೇಶ ಈಡೇರಲಿ. ನಾವೆಲ್ಲರೂ ಒಟ್ಟಾಗಿ ಸೇರಿ ಕೆಲಸ ಮಾಡೋಣ, ತಂತ್ರಜ್ಞಾನ ಅವಿಷ್ಕರರದಲ್ಲಿ ಮುಂದೆ ಸಾಗೋಣ. ನಿಮಗೆ ಶಕ್ತಿ ತುಂಬುವಂತಹ ನೀತಿಗಳನ್ನು ನಮ್ಮ ಸರ್ಕಾರ ರೂಪಿಸಲಿದೆ. ಈ ಮೂಲಕ ಬೆಂಗಳೂರಿನಲ್ಲಿ ಹೊಸ ಕ್ರಾಂತಿಗೆ ಸಿದ್ಧರಾಗೋಣ ಎಂದು ಕರೆ ನೀಡಿದರು.
ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಸಣ್ಣ ನೀರಾವರಿ ಸಚಿವರಾದ ಎನ್.ಎಸ್. ಭೋಸರಾಜು ಮಾತನಾಡಿ, ಕ್ವಾಂಟಮ್ ಕಂಪ್ಯೂಟರ್ ಕ್ಷೇತ್ರದಲ್ಲಿ 2035 ರ ವೇಳೆಗೆ ಕರ್ನಾಟಕವನ್ನು 20 ಶತಕೋಟಿ ಡಾಲರ್ ಕ್ವಾಂಟಮ್ ಆರ್ಥಿಕ ರಾಜ್ಯವಾಗಿ ಅಭಿವೃದ್ಧಿಪಡಿಸಲು ನಮ್ಮ ಸರ್ಕಾರ ದಿಟ್ಟ ಕ್ರಮಗಳನ್ನು ಕೈಗೊಳ್ಳಲಿದೆ. ಇದಕ್ಕೆ ಪೂರಕವಾಗಿ ನಮ್ಮ ಸರ್ಕಾರ ಕ್ಯೂ-ಸಿಟಿ (ಕ್ವಾಂಟಮ್) ನಗರಿಯನ್ನು ಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ.
ಕ್ವಾಂಟಮ್ ಕಂಪ್ಯೂಟರ್ ವಲಯದಲ್ಲಿ 2 ಲಕ್ಷಕ್ಕೂ ಹೆಚ್ಚು ನೇರ ಉದ್ಯೋಗಗಳನ್ನು ಸೃಷ್ಟಿಸುವ ಮೂಲಕ 2035 ರ ವೇಳೆಗೆ ಜಾಗತಿಕ ಕ್ವಾಂಟಮ್ ತಂತ್ರಜ್ಞಾನ ಮಾರುಕಟ್ಟೆಯಲ್ಲಿ ಶೇ. 20ರಷ್ಟು ಪಾಲನ್ನು ಕರ್ನಾಟಕದ್ದಾಗಿಸಲು ಗುರಿ ಇಟ್ಟುಕೊಂಡು ಅದಕ್ಕಾಗಿ ಕಾರ್ಯತಂತ್ರಗಳನ್ನು ರೂಪಿಸಲಾಗುತ್ತಿದೆ ಎಂದು ತಿಳಿಸಿದರು.
ಇದಕ್ಕೆ ಪೂರಕವಾಗಿ ನಮ್ಮ ಸರ್ಕಾರವು ಕ್ಯೂ- ಸಿಟಿ (ಕ್ವಾಂಟಮ್) ನಗರಿಯನ್ನು ಬೆಂಗಳೂರಿನ ಬಳಿ ಸ್ಥಾಪಿಸಲಿದ್ದು, ಇಲ್ಲಿ ವಿಶ್ವ ದರ್ಜೆಯ ಸೌಲಭ್ಯಗಳನ್ನು ಒದಗಿಸಲಾಗುವುದು. ಇದು ಶೈಕ್ಷಣಿಕ ಸಂಸ್ಥೆಗಳು, ನಾವೀನ್ಯತಾ ಕೇಂದ್ರಗಳು, ಕ್ವಾಂಟಮ್ ಹಾರ್ಡ್ವೇರ್ಗಳಿಗಾಗಿ ಉತ್ಪಾದನಾ ಕ್ಲಸ್ಟರ್ಗಳು, ಪೆÇ್ರಸೆಸರ್ಗಳು ಮತ್ತು ಸಹಾಯಕಗಳು ಹಾಗೂ ಕ್ವಾಂಟಮ್ ಎಚ್.ಪಿ.ಸಿ. ಡೇಟಾ ಕೇಂದ್ರಗಳ ಸಹಯೋಗದೊಂದಿಗೆ ಸಂಶೋಧನೆ ಮತ್ತು ಅಭಿವೃದ್ಧಿ ಕ್ಲಸ್ಟರ್ಗಳನ್ನು ಸಂಯೋಜಿಸಲಿದೆ," ಎಂದರು.
ನಾವೀನ್ಯತೆಗೆ ಹೆಸರಾದ ಬೆಂಗಳೂರಿನಲ್ಲಿ ಪ್ರಮುಖ ವಿಜ್ಞಾನ ಸಂಸ್ಥೆಗಳು, ಹಲವಾರು ಸ್ಟಾರ್ಟ್ಅಪ್ಗಳು ಮತ್ತು ಸಂಶೋಧನೆ ಮತ್ತು ಅಭಿವೃದ್ಧಿ ಪ್ರಯೋಗಾಲಯಗಳಿದ್ದು, ಭಾರತದ ಕ್ವಾಂಟಮ್ ರಾಜಧಾನಿಯಾಗಿ ಹೊರಹೊಮ್ಮಿದೆ. ಬೆಂಗಳೂರಿನಲ್ಲಿ ಸ್ಥಳೀಯವಾಗಿ ನಿರ್ಮಿಸಲಾದ ದೇಶದ ಮೊದಲ ವಾಣಿಜ್ಯ ದರ್ಜೆಯ ಕ್ವಾಂಟಮ್ ಕಂಪ್ಯೂಟರ್ ಈಗಾಗಲೇ ತನ್ನ ವಾಣಿಜ್ಯ ಸೇವೆಗಳನ್ನು ಒದಗಿಸುತ್ತಿದೆ. ನಮ್ಮ ಕನ್ನಡಿಗ ಮತ್ತು ನಮ್ಮ ಸ್ವದೇಶಿ ಉದ್ಯಮವು ಅಭಿವೃದ್ಧಿಪಡಿಸಿದ ಈ ಕ್ವಾಂಟಮ್ ಕಂಪ್ಯೂಟರ್ ಕೇವಲ ಪರಿಕಲ್ಪನೆಯ ಪುರಾವೆಯಲ್ಲ, ಇದು ದೃಢನಿಶ್ಚಯಕ್ಕೆ ಸಾಕ್ಷಿಯಾಗಿದೆ ಎಂದರು.
ಕರ್ನಾಟಕ ಸರ್ಕಾರವು ಐಐಎಸ್ಸಿ ಬೆಂಗಳೂರಿನಲ್ಲಿ ಕ್ವಾಂಟಮ್ ಸಂಶೋಧನಾ ಉದ್ಯಾನವನವನ್ನು ಸ್ಥಾಪಿಸುವ ಮೂಲಕ ಈ ತಂತ್ರಜ್ಞಾನಕ್ಕೆ ಈಗಾಗಲೇ ಮಹತ್ವದ ಬದ್ಧತೆಯನ್ನು ತೋರಿದೆ. ಈ ಸೌಲಭ್ಯವು 55ಕ್ಕೂ ಹೆಚ್ಚು ಸಂಶೋಧನೆ ಮತ್ತು ಅಭಿವೃದ್ಧಿ ಯೋಜನೆಗಳು ಮತ್ತು 13 ಸ್ಟಾರ್ಟ್ ಅಪ್ಗಳನ್ನು ಬೆಂಬಲಿಸಿದೆ. ವಾರ್ಷಿಕ 1,000ಕ್ಕೂ ಹೆಚ್ಚು ಕ್ವಾಂಟಮ್ ತಜ್ಞರಿಗೆ ತರಬೇತಿ ನೀಡುತ್ತಿದೆ. ದೀರ್ಘಾವಧಿಯಲ್ಲಿ ಇದನ್ನು ಮುಂದುವರಿಸಲು ನಮ್ಮ ಸರ್ಕಾರವು 48 ಕೋಟಿ ರೂ. ಹೆಚ್ಚುವರಿ ಅನುದಾನ ಒದಗಿಸಿದೆ ಎಂದು ತಿಳಿಸಿದರು.
ಕ್ವಾಂಟಮ್ ತಂತ್ರಜ್ಞಾನ ಕ್ಷೇತ್ರದಲ್ಲಿ ನಮ್ಮ ದೃಷ್ಟಿಕೋನವನ್ನು ಸಾಕಾರಗೊಳಿಸಲು ಈಗಾಗಲೇ ಕ್ವಾಂಟಮ್ ಮಾರ್ಗಸೂಚಿಯನ್ನು ಹೊರತರಲಾಗಿದೆ. ಆ ಮೂಲಕ ಈ ತಂತ್ರಜ್ಞಾನದ ಪ್ರಗತಿಗೆ ಸೂಕ್ತ ಅಡಿಪಾಯ ಹಾಕಿ, ಮೂಲ ಸೌಕರ್ಯ ಒದಗಿಸುವುದು, ಸಂಶೋಧನೆ ಮತ್ತು ಅಭಿವೃದ್ಧಿಗೆ ಬೆಂಬಲ ನೀಡಿ ಕರ್ನಾಟಕವನ್ನು ಕ್ವಾಂಟಮ್ ಪವರ್ಹೌಸ್ ಮತ್ತು ರಫ್ತು ತಾಣವಾಗಿ ಅಭಿವೃದ್ಧಿಪಡಿಸುವ ಗುರಿ ಹಾಕಿಕೊಳ್ಳಲಾಗಿದೆ ಎಂದು ಹೇಳಿದರು.
ಈ ವರ್ಷದ ಅಂತ್ಯದ ವೇಳೆಗೆ ಕ್ವಾಂಟಮ್ ಚಿಪ್ ಫ್ಯಾಬ್ರಿಕೇಶನ್ ಸಾಮಥ್ರ್ಯಗಳನ್ನು ಸ್ಥಾಪಿಸುವ ನಿರೀಕ್ಷೆಯಿದೆ ಎಂದು ಹೇಳಿದ ಸಚಿವರು, ಜಾಗತಿಕ ಕ್ವಾಂಟಮ್ ಪವರ್ಹೌಸ್ ಆಗಿ ಕರ್ನಾಟಕವನ್ನು ಕೊಂಡೊಯ್ಯಲು ಉನ್ನತ ಮಾಧ್ಯಮಿಕ ಮಟ್ಟದಲ್ಲಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸ್ಟ್ರೀಮ್ ಲ್ಯಾಬ್ಸ್ ಉಪಕ್ರಮದ ಮೂಲಕ ಕ್ವಾಂಟಮ್ ಪಠ್ಯಕ್ರಮ ಪರಿಚಯಿಸಲಾಗುವುದು. ವಿದ್ಯಾರ್ಥಿಗಳಿಗೆ ಮೀಸಲಾದ ಡಿಎಸ್ಟಿ ಪಿಎಚ್ಡಿ ಫೆಲೋಶಿಪ್ಗಳನ್ನು ವಿಸ್ತರಿಸಲಾಗುವುದು. ಈ ಫೆಲೋಶಿಪ್ ಗಳು ಕ್ವಾಂಟಮ್ ಕಂಪ್ಯೂಟಿಂಗ್, ಕ್ವಾಂಟಮ್ ಸಂವಹನ ಮತ್ತು ಕ್ವಾಂಟಮ್ ಸೆನ್ಸಿಂಗ್, ಕ್ವಾಂಟಮ್ ಸಾಧನಗಳಂತಹ ಪ್ರಮುಖ ಕ್ಷೇತ್ರಗಳಲ್ಲಿ ಸಾಮಥ್ರ್ಯ ವೃದ್ಧಿಗೆ ಸಹಕಾರಿಯಾಗಲಿದೆ ಎಂದು ತಿಳಿಸಿದರು.
ಕೇಂದ್ರ ಸರ್ಕಾರವು ಸುಮಾರು 6,000 ಕೋಟಿ ರೂ. ವೆಚ್ಚದಲ್ಲಿ ರಾಷ್ಟ್ರೀಯ ಕ್ವಾಂಟಮ್ ಮಿಷನ್ ಆರಂಭಿಸಿದ್ದು, ಇದರ ಯಶಸ್ವಿ ಅನುμÁ್ಠನಕ್ಕಾಗಿ ಮತ್ತು ರಾಜ್ಯಗಳನ್ನು ಬೆಂಬಲಿಸಲು ಕರ್ನಾಟಕದ ನೇತೃತ್ವದಲ್ಲಿ ನಾವೀನ್ಯತೆ ಮತ್ತ ವಿಕೇಂದ್ರೀಕೃತ ವಿಧಾನಗಳನ್ನು ಅಳವಡಿಸಿಕೊಳ್ಳಲು ಅನುಮತಿ ನೀಡಬೇಕು ಎಂದು ಸಚಿವರು ಇದೇ ವೇಳೆ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿ ಅಭಯ್ ಕರಂಡಿಕರ್ ಮೂಲಕ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.
ಕಾರ್ಯಕ್ರಮದಲ್ಲಿ ಭಾರಿ ಮತ್ತು ಮಧ್ಯಮ ಕೈಗಾರಿಕೆ ಸಚಿವರಾದ ಎಂ.ಬಿ.ಪಾಟೀಲ, ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್ ಖರ್ಗೆ, ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ.ಸುಧಾಕರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.