ಬೆಂಗಳೂರು, ಆಗಸ್ಟ್ 19, (ಕರ್ನಾಟಕ ವಾರ್ತೆ) : ಬಾಗಲಕೋಟೆಯ ಕೃಷಿ ವಿಶ್ವವಿದ್ಯಾಲಯವನ್ನು ಯಾವುದೇ ಕಾರಣಕ್ಕೂ ಮುಚ್ಚಲಾಗುವುದಿಲ್ಲ ಅಥವಾ ಯಾವುದೇ ವಿಶ್ವವಿದ್ಯಾನಿಲಯದ ಜೊತೆ ವಿಲೀನಗೊಳಿಸಲಾಗುವುದಿಲ್ಲ ಎಂದು ಕೃಷಿ ಸಚಿವ ಎನ್, ಚಲುವರಾಯಸ್ವಾಮಿ ಅವರು ತಿಳಿಸಿದರು.
ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಪರಿಷತ್ ಸದಸ್ಯ ನಿರಾಣಿ ಹಣಮಂತ್ ರುದ್ರಪ್ಪ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರ ಪರವಾಗಿ ಉತ್ತರಿಸಿದ ಸಚಿವರು, ಕೃಷಿ ವಿಶ್ವವಿದ್ಯಾನಿಲಯಗಳ ಮರು ಸಂಘಟಿಸುವ ಕುರಿತು ನಿವೃತ್ತ ಐ.ಎ.ಎಸ್. ಅಧಿಕಾರಿ ವಿಜಯ ಭಾಸ್ಕರ್ ಅವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದೆ. ಸಮಿತಿ ಸಲ್ಲಿಸುವ ಸಮಗ್ರ ವರದಿಯನ್ನು ಪರಿಶೀಲಿಸಿ ಅಗತ್ಯ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.