ಬೆಂಗಳೂರು, ಸೆಪ್ಟೆಂಬರ್ 02, (ಕರ್ನಾಟಕ ವಾರ್ತೆ): ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ ಸಂಬಂಧಿಸಿದಂತೆ ಚುನಾವಣಾ ವೇಳಾಪಟ್ಟಿಯು ಪ್ರಕಟಗೊಂಡಿರುವ ಬಗ್ಗೆ ಸುಳ್ಳು ಮಾಹಿತಿಯು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದು ರಾಜ್ಯ ಚುನಾವಣಾ ಆಯೋಗದ ಗಮನಕ್ಕೆ ಬಂದಿರುತ್ತದೆ. ಆದರೆ ರಾಜ್ಯ ಚುನಾವಣಾ ಆಯೋಗದಿಂದ ಈವರೆಗೂ ಯಾವುದೇ ವೇಳಾಪಟ್ಟಿಯನ್ನು ಪ್ರಕಟಿಸಿರುವುದಿಲ್ಲ ಎಂದು ರಾಜ್ಯ ಚುನಾವಣಾ ಆಯೋಗವು ಸ್ಪಷ್ಟಪಡಿಸಿದೆ.
ರಾಜ್ಯ ಚುನಾವಣಾ ಆಯೋಗವು ಪತ್ರಿಕಾ ಹಾಗೂ ದೃಶ್ಯ ಮಾಧ್ಯಮದ ಮೂಲಕ ಪತ್ರಿಕಾ ಗೋಷ್ಠಿಯನ್ನು ಕರೆದು ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಘೋಷಿಸುತ್ತದೆ. ಅದುದರಿಂದ, ಪ್ರಸ್ತುತ ಹರಿದಾಡುತ್ತಿರುವ ಚುನಾವಣಾ ವೇಳಾಪಟ್ಟಿಯು ಸುಳ್ಳು ಮಾಹಿತಿಯಾಗಿರುವುದರಿಂದ ಸಾರ್ವಜನಿಕರು ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದು ಎಂದು ರಾಜ್ಯ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.