ಬೆಂಗಳೂರು, ಅಕ್ಟೋಬರ್ 21, (ಕರ್ನಾಟಕ ವಾರ್ತೆ): ಕರ್ನಾಟಕ ಹಾಲು ಮಹಾಮಂಡಳಿ ನಿಯಮಿತ (ಕೆಎಂಎಫ್) ಸಂಸ್ಥೆಯು ಕಳೆದ ಐದು ದಶಕಗಳಿಂದ ರಾಜ್ಯದ ಹೈನುಗಾರಿಕೆ ಮತ್ತು ಸಹಕಾರ ಕ್ಷೇತ್ರದಲ್ಲಿ ಪ್ರಮುಖ ಸ್ಥಾನವನ್ನು ಹೊಂದಿದ್ದು, ಹಾಲು ಉತ್ಪಾದಕರ ರೈತರ ಹಿತದೃಷ್ಟಿಯಿಂದ ರಾಜ್ಯದ ಹೈನುಗಾರಿಕೆ ಸಹಕಾರಿ ಚಳುವಳಿಯನ್ನು ಬಲಪಡಿಸುವಲ್ಲಿ ಮುಂಚೂಣಿಯಲ್ಲಿದೆ ಎಂದು ಪಶುಸಂಗೋಪನೆ ಮತ್ತು ರೇμÉ್ಮ ಸಚಿವ ಕೆ.ವೆಂಕಟೇಶ್ ಅವರು ತಿಳಿಸಿದರು.
ಇಂದು ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಪ್ರತಿದಿನ ರಾಜ್ಯದ ವಿವಿಧ ಹೈನುಗಾರ ರೈತರಿಂದ ಸರಾಸರಿ 1 ಕೋಟಿ ಲೀಟರ್ ಹಾಲು ಸಂಗ್ರಹಿಸಲಾಗುತ್ತಿದ್ದು, ಅದರಲ್ಲಿ ಸುಮಾರು 65 ಲಕ್ಷ ಲೀಟರ್ ಹಾಲು, ಮೊಸರು ಹಾಗೂ ಯುಎಚ್ ಹಾಲು ಉತ್ಪನ್ನಗಳನ್ನು ರಾಜ್ಯ ಮತ್ತು ಹೊರ ರಾಜ್ಯ ಮಾರುಕಟ್ಟೆಗಳಲ್ಲಿ ಗ್ರಾಹಕರಿಗೆ ತಲುಪಿಸಲಾಗುತ್ತಿದೆ.
"ನಂದಿನಿ" ಬ್ರಾಂಡ್ ನಡಿಯಲ್ಲಿ ಹಾಲಿನೊಂದಿಗೆ ತುಪ್ಪ ಬೆಣ್ಣೆ, ಪನೀರ್, ಸಿಹಿ-ತಿನಿಸುಗಳು, ಹಾಲಿನ ಪುಡಿ, ಪಾನೀಯಗಳು ಸೇರಿದಂತೆ 175 ಕ್ಕೂ ಅಧಿಕ ಬಗೆಯ ಹಾಲು ಹಾಗೂ ಹಾಲಿನ ಉತ್ಪನ್ನಗಳನ್ನು ರಾಜ್ಯ, ನೆರೆ ರಾಜ್ಯಗಳಾದ ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಮಹಾರಾಷ್ಟ್ರ, ಗೋವಾ, ಕೇರಳ ಹಾಗೂ ದೆಹಲಿ, ಅಸ್ಸಾಂ ಮತ್ತು ಹೊರದೇಶಗಳ ಮಾರುಕಟ್ಟೆಗಳಿಗೂ ಯಶಸ್ವಿಯಾಗಿ ಮಾರಾಟ ಮಾಡಲಾಗುತ್ತಿದೆ.
ಹಾಲು ಮತ್ತು ಹಾಲಿನ ಉತ್ಪನ್ನಗಳ ಶುದ್ಧತೆ, ಗುಣಮಟ್ಟ ಮತ್ತು ಕೈಗೆಟುಕುವ ಬೆಲೆಯು "ನಂದಿನಿ" ಬ್ರಾಂಡ್ ಅನ್ನು ಗ್ರಾಹಕರ ವಿಶ್ವಾಸದ ಪ್ರತೀಕವನ್ನಾಗಿ ಮಾಡಿದೆ.
ಪ್ರತಿ ವರ್ಷ ದಸರಾ ಮತ್ತು ದೀಪಾವಳಿ ಹಬ್ಬಗಳ ಸಂದರ್ಭದಲ್ಲಿ ಸಿಹಿ ತಿನಿಸುಗಳಿಗೆ ರಾಜ್ಯದಾದ್ಯಂತ ಹೆಚ್ಚಿನ ಬೇಡಿಕೆ ಕಂಡುಬರುತ್ತದೆ. ಈ ಹಬ್ಬದ ಅವಧಿಯಲ್ಲಿ ನಂದಿನಿ ಬ್ರಾಂಡ್ನಡಿಯಲ್ಲಿ ಲಭ್ಯವಿರುವ 40 ಕ್ಕೂ ಹೆಚ್ಚು ಸಿಹಿ ಉತ್ಪನ್ನ ಮಾದರಿಗಳ ಉತ್ಪಾದನೆ ಮತ್ತು ಮಾರಾಟಕ್ಕೆ ಕೆಎಂಎಫ್ ಮುಂಚಿತ ಸಿದ್ಧತೆ ಕೈಗೊಂಡಿತ್ತು.
2024ರ ದಸರಾ ಮತ್ತು ದೀಪಾವಳಿ ಹಬ್ಬದ ಅವಧಿಯಲ್ಲಿ ಒಟ್ಟು 725 ಮೆಟ್ರಿಕ್ ಟನ್ ಸಿಹಿ ಉತ್ಪನ್ನಗಳನ್ನು ಮಾರಾಟ ಮಾಡಿ ರೂ. 33.48 ಕೋಟಿ ವಹಿವಾಟು ದಾಖಲಿಸಲಾಗಿತ್ತು. ಈ ಬಾರಿ 2025ರ ಹಬ್ಬದ ಅವಧಿಗೆ ಹೆಚ್ಚುವರಿ ಬೇಡಿಕೆಯನ್ನು ಪರಿಗಣಿಸಿ, ಸುಮಾರು ಎರಡು ತಿಂಗಳುಗಳ ಮುಂಚಿತವಾಗಿ ಎಲ್ಲ ಸದಸ್ಯ ಹಾಲು ಒಕ್ಕೂಟಗಳ ಸಹಕಾರದೊಂದಿಗೆ ನಿಖರ ಯೋಜನೆ ರೂಪಿಸಿ 1000 ಮೆಟ್ರಿಕ್ ಟನ್ ಮಾರಾಟ ಗುರಿ ನಿಗಿದಪಡಿಸಲಾಯಿತು.
ಸದರಿ ಗುರಿಯನ್ನು ಮೀರಿ ಈ ವರ್ಷ ಕೆಎಂಎಫ್ ಮತ್ತು ಸದಸ್ಯ ಹಾಲು ಒಕ್ಕೂಟಗಳು "ಒಟ್ಟಾಗಿ 1100 ಮೆಟ್ರಿಕ್ ಟನ್ ಸಿಹಿ ಉತ್ಪನ್ನಗಳನ್ನು ಮಾರಾಟ ಮಾಡಿದ್ದು, ಒಟ್ಟಾರೆ ರೂ. 46.00 ಕೋಟಿಗಳ ದಾಖಲೆಯ ವಹಿವಾಟು" ಸಾಧಿಸುವ ಮೂಲಕ ಒಂದು ಮಹತ್ವದ ಮೈಲುಗಲ್ಲು ನಿರ್ಮಿಸಲಾಗಿದೆ. ಕಳೆದ ಸಾಲಿಗೆ ಹೋಲಿಕೆ ಮಾಡಿದಾಗ ಶೇ. 38 ರಷ್ಟು ವಹಿವಾಟು ಪ್ರಗತಿಯಾಗಿದ್ದು, ಇದು ಕೆ.ಎಂ.ಎಫ್ ಇತಿಹಾಸದಲ್ಲಿಯೇ ಸರ್ವಕಾಲಿಕ ದಾಖಲೆಯಾಗಿರುತ್ತದೆ.
ಈ ಸಾಧನೆ "ನಂದಿನಿ" ಬ್ರಾಂಡ್ ನ ಗುಣಮಟ್ಟ ಶುದ್ಧತೆ ಮತ್ತು ಗ್ರಾಹಕರ ವಿಶ್ವಾಸದ ಪ್ರತಿಫಲವಾಗಿದ್ದು, ರಾಜ್ಯದ ಹಾಲು ಉತ್ಪಾದಕರ ಶ್ರಮ ಮತ್ತು ಸಹಕಾರಿ ಬಲದ ದೃಢತೆಗೂ ಸಾಕ್ಷಿಯಾಗಿದೆ ಎಂದು ಸಚಿವರು ತಿಳಿಸಿದರು.