*ರಾಜ್ಯ ಸರ್ಕಾರ ಕೂಡಲೇ ಪ್ರತಿಯೊಬ್ಬ ರೈತರಿಂದ ಕನಿಷ್ಠ ನೂರು ಕ್ವಿಂಟಾಲ್ ಮೆಕ್ಕೆಜೋಳ ಖರೀದಿ ಮಾಡಲಿ: ಬಸವರಾಜ ಬೊಮ್ಮಾಯಿ*

varthajala
0


*ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಸಮಸ್ಯೆಗಳ ಚರ್ಚೆಯಾಗಬೇಕು: ಬಸವರಾಜ ಬೊಮ್ಮಾಯಿ*

ಹಾವೇರಿ: ರಾಜ್ಯ ಸರ್ಕಾರ ಕೂಡಲೇ ಪ್ರತಿಯೊಬ್ಬ ರೈತರಿಂದ ಕನಿಷ್ಠ ನೂರು ಕ್ವಿಂಟಾಲ್ ಮೆಕ್ಕೆ ಜೋಳ ಖರೀದಿ ಮಾಡಬೇಕು ಮತ್ತು  ಎಂಎಸ್ ಪಿಗೆ ಹೆಚ್ಚುವರಿಯಾಗಿ ರಾಜ್ಯ ಸರ್ಕಾರ ಕೊಡಬೇಕು ಎನ್ನುವ ರೈತರ ಬೇಡಿಕೆಗೆ ನಮ್ಮ ಸಂಪೂರ್ಣ ಬೆಂಬಲ ಇದೆ ಎಂದು  ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಸರ್ಕಾರ ರೈತರ ಜೊತೆ ಚೆಲ್ಲಾಟ ಆಡುತ್ತಿದೆ. ರೈತರ ಮೂಗಿಗೆ ತುಪ್ಪ ಸವರುತ್ತಿದೆ. ರೈತರು ಈ ವರ್ಷ ದಾಖಲೆ ಪ್ರಮಾಣದಲ್ಲಿ ಮೆಕ್ಕೆಜೋಳ ಬೆಳೆದಿದ್ದಾರೆ. ಹಾವೇರಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಬೆಳೆದಿದ್ದಾರೆ. ಒಬ್ಬ ರೈತರಿಂದ ಕೇವಲ 20 ಕ್ವಿಂಟಾಲ್ ತೆಗೆದುಕೊಳ್ಳುತ್ತೇವೆ ಎನ್ನುವುದು ಮೂಗಿಗೆ ತುಪ್ಪ ಹಚ್ಚುವ ಕೆಲಸ ಇದರಿಂದ ರೈತರಿಗೆ ಏನೂ ಅನುಕೂಲ ಆಗುವುದಿಲ್ಲ. ಮಾರುಕಟ್ಡೆಯಲ್ಲಿ ದರವೂ ಏರುವುದಿಲ್ಲ. ರಾಜ್ಯದಲ್ಲಿ 54 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಬೆಳೆದಿದ್ದು ಅದರಲ್ಲಿ ಕನಿಷ್ಟ 25 ಲಕ್ಷ ಮೆಟ್ರಿಕ್ ಟನ್ ಖರೀದಿ ಮಾಡಬೇಕು ಆಗ ಬೇಡಿಕೆ ಹೆಚ್ಚಾಗುತ್ತದೆ. ಸರ್ಕಾರ ಅಷ್ಟು ಖರೀದಿ ಮಾಡದಿರುವುದರಿಂದ ರೈತರು ಆಕ್ರೋಶಗೊಂಡಿದ್ದಾರೆ ಎಂದು ಹೇಳಿದರು.

ಎರಡನೆಯ ಬೇಡಿಕೆ ಪ್ರತಿಯೊಂದು ತಾಲೂಕಿನಲ್ಲಿಯೂ ಖರೀದಿ ಕೇಂದ್ರ ತೆಗೆಯಬೇಕು. ಎಂ ಎಸ್ ಪಿ ಜೊತೆಗೆ ರಾಜ್ಯ ಸರ್ಕಾರ ತನ್ನ ಅನುದಾನವನ್ನೂ ಸೇರಿಸಿ ಕೊಡಬೇಕು ಎನ್ನುವುದು ರೈತರ ಬೇಡಿಕೆ. ಖರೀದಿ ಕೇಂದ್ರವೂ ಕೂಡ ಸರಿಯಾಗಿ ಆರಂಭವಾಗಿಲ್ಲ. ಹಾವೇರಿಯಲ್ಲಿ ಇನ್ನೂ ಯಾವುದೇ ಪ್ರಕ್ರಿಯೆ ನಡೆದಿಲ್ಲ. ಹೀಗಾಗಿ ರೈತರು ರೊಚ್ಚಿಗೆದ್ದು ರಸ್ತೆ ತಡೆ ಮಾಡುತ್ತಿದ್ದಾರೆ. ಈಗಲಾದರೂ ಸರ್ಕಾರ ಕಣ್ಣು ತೆರೆದು ಪ್ರತಿಯೊಬ್ಬ ರೈತರಿಂದ ಕನಿಷ್ಠ ನೂರು ಕ್ವಿಂಟಾಲ್ ಮೆಕ್ಕೆ ಜೋಳ ಖರೀದಿ ಮಾಡಬೇಕು ಮತ್ತು  ಎಂಎಸ್ ಪಿಗೆ ಹೆಚ್ಚುವರಿಯಾಗಿ ರಾಜ್ಯ ಸರ್ಕಾರ ಕೊಡಬೇಕು ಎನ್ನುವ ರೈತರ ಬೇಡಿಕೆಗೆ ನಮ್ಮ ಸಂಪೂರ್ಣ ಬೆಂಬಲ ಇದೆ ಎಂದು ಹೇಳಿದರು.


*ಉತ್ತರ ಕರ್ನಾಟಕ ಸಮಸ್ಯೆಗಳ ಚರ್ಚೆಯಾಗಬೇಕು*

ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಬಗ್ಗೆ ಚರ್ಚೆಯಾಗುತ್ತಿಲ್ಲ ಎನ್ನುವ ಕುರಿತು ಕೇಳಿದ ಪ್ರಶ್ನೆಗೆ ಈ ಬಾರಿ ಉತ್ತರ ಕರ್ನಾಟಕದಲ್ಲಿ ವಿಶೇಷವಾಗಿ ಕಲ್ಯಾಣ ಕರ್ನಾಟಕದಲ್ಲಿ ಆಗುತ್ತಿರುವ ಅನ್ಯಾಯ, ಯಾವುದೇ ಮೂಲಬೂತ ಸೌಕರ್ಯ ಆಗುತ್ತಿಲ್ಲ, ರಸ್ತೆ ಹದಗೆಟ್ಟು ಹೋಗಿವೆ, ನೀರಾವರಿ ಯೋಜನೆಗಳು ಸ್ಥಗಿತಗೊಂಡಿವೆ. ಅಲ್ಲದೇ ಕಬ್ಬು ಮತ್ತು ಮೆಕ್ಕೆಜೋಳ ಉತ್ತರ ಕರ್ನಾಟಕ ಭಾಗದಲ್ಲಿ ರೈತರು ದೊಡ್ಡ ಪ್ರಮಾಣದಲ್ಲಿ ಬೆಳೆಯುತ್ತಿದ್ದಾರೆ. ಇವೆಲ್ಲ ವಿಷಯವನ್ನು   ಸಮಗ್ರವಾಗಿ ಚರ್ಚೆ ಮಾಡಿ ಸರ್ಕಾರ ಪರಿಹಾರ ಕೊಡಬೇಕು. ಬೆಳೆ ಹಾನಿ ಪರಿಹಾರದಲ್ಲೂ ದೊಡ್ಡ ಅನ್ಯಾಯ ಆಗುತ್ತಿದೆ ಇದರ ಬಗ್ಗೆ ರೈತರು ದೊಡ್ಡ ಮಟ್ಟದ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಎಲ್ಲ ವಿಷಯಗಳು ಚರ್ಚೆಯಾಗಬೇಕು ಎನ್ನುವುದು ನಮ್ಮ ಆಶಯ ಎಂದು ಹೇಳಿದರು.

Post a Comment

0Comments

Post a Comment (0)