ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾಗಿ ಒಟ್ಟು 7 ವರ್ಷ 240 ದಿನಗಳ ಸುದೀರ್ಘ ಅವಧಿಗೆ ರಾಜ್ಯದ ಜನರ ಸೇವೆಯಲ್ಲಿ ಮುಂದುವರೆಯುತ್ತಾ ರಾಜ್ಯದ ಆಡಳಿತ ಇತಿಹಾಸದಲ್ಲಿ ಅಪರೂಪದ ಹಾಗೂ ಮಹತ್ವದ ಸಾಧನೆಯಾಗಿದೆ. ಈ ಅವಧಿಯಲ್ಲಿ ತಾವು ಪ್ರದರ್ಶಿಸಿರುವ ಮತ್ತು ಪ್ರದರ್ಶಿಸುತ್ತಿರುವ ದಿಟ್ಟ ನಾಯಕತ್ವ, ದೂರದೃಷ್ಟಿಯ ಆಡಳಿತ ಮತ್ತು ಜನಪರ ಬದ್ಧತೆ ರಾಜ್ಯದ ಸವಾರ್ಂಗೀಣ ಅಭಿವೃದ್ಧಿಗೆ ಭದ್ರವಾದ ಅಡಿಪಾಯವನ್ನು ನಿರ್ಮಿಸಿದೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶುಭ ಹಾರೈಸಿದ್ದಾರೆ.
ಸಿದ್ದರಾಮಯ್ಯ ಅವರ ಸಾಧನೆ ಕುರಿತಂತೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಅವರು ತಮ್ಮ ಆಡಳಿತ ಕಾಲದಲ್ಲಿ ಸಾಮಾಜಿಕ ನ್ಯಾಯವು ಕೇವಲ ಘೋಷಣೆಯಲ್ಲದೇ ಕಾರ್ಯರೂಪಕ್ಕೆ ಬಂದಿದ್ದು, ಸಮಾಜದ ಅಂಚಿನಲ್ಲಿರುವ ವರ್ಗಗಳಾದ ದಲಿತರು, ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು, ಮಹಿಳೆಯರು, ರೈತರು ಹಾಗೂ ಕಾರ್ಮಿಕರಿಗೆ ಸರ್ಕಾರದ ಸೌಲಭ್ಯಗಳು ನೇರವಾಗಿ ತಲುಪುವಂತೆ ವ್ಯವಸ್ಥಿತ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಬಣ್ಣಿಸಿದ್ದಾರೆ.
ಸಂವಿಧಾನದ ಆಶಯಗಳನ್ನು ನೆಲೆಗೊಳಿಸಿಕೊಂಡು, ಸಮಾನತೆ, ಸ್ವಾಭಿಮಾನ ಮತ್ತು ಮಾನವೀಯ ಮೌಲ್ಯಗಳನ್ನು ಆಡಳಿತದ ಕೇಂದ್ರ ಬಿಂದುಗೊಳಿಸಿರುವುದು ತಮ್ಮ ನಾಯಕತ್ವದ ವೈಶಿಷ್ಟ್ಯವಾಗಿದೆ ಎಂದು ಶ್ಲಾಘೀಸಿದ್ದಾರೆ.
ಶಿಕ್ಷಣ ಕ್ಷೇತ್ರದಲ್ಲಿ ಸಮಾನ ಅವಕಾಶಗಳನ್ನು ಒದಗಿಸುವ ನಿಟ್ಟಿನಲ್ಲಿ ಕೈಗೊಂಡ ಕ್ರಮಗಳು, ಗ್ಯಾರಂಟಿ ಯೋಜನೆಗಳು, ಆರೋಗ್ಯ ಕ್ಷೇತ್ರದಲ್ಲಿ ಬಡವರಿಗೆ ಗುಣಮಟ್ಟದ ಚಿಕಿತ್ಸೆಯನ್ನು ತಲುಪಿಸುವ ಯೋಜನೆಗಳು, ಆಹಾರ ಭದ್ರತೆ ಮೂಲಕ ಬಡವರ ಬದುಕಿಗೆ ನೆಮ್ಮದಿ ನೀಡಿದ ಕಾರ್ಯಗಳು ಹಾಗೂ ಗ್ರಾಮೀಣಾಭಿವೃದ್ಧಿ ಕಾರ್ಯಕ್ರಮಗಳ ಮೂಲಕ ಹಳ್ಳಿಗಳ ಸಬಲೀಕರಣಕ್ಕೆ ನೀಡಿದ ಒತ್ತು ರಾಜ್ಯದ ಅಭಿವೃದ್ಧಿಗೆ ಹೊಸ ಚೈತನ್ಯವನ್ನು ತಂದಿದೆ. ಜೊತೆಗೆ ಆರ್ಥಿಕ ಶಿಸ್ತನ್ನು ಕಾಪಾಡಿಕೊಂಡು ಜನಕಲ್ಯಾಣಕ್ಕೆ ಆದ್ಯತೆ ನೀಡಿರುವುದು ನಿಮ್ಮ ಆಡಳಿತದ ಮಹತ್ವದ ಸಾಧನೆಯಾಗಿದೆ ಎಂದು ತಿಳಿಸಿದ್ದಾರೆ.
ಪಾರದರ್ಶಕತೆ, ನೈತಿಕತೆ ಮತ್ತು ಜವಾಬ್ದಾರಿಯುತ ಆಡಳಿತವನ್ನು ತಾವು ಸದಾ ಪ್ರಾಮುಖ್ಯತೆಯಿಂದ ಅನುಸರಿಸಿದ್ದು, ಸರ್ಕಾರದ ಮೇಲಿನ ಜನರ ವಿಶ್ವಾಸವನ್ನು ಮತ್ತಷ್ಟು ಗಟ್ಟಿಗೊಳಿಸಿದೆ. ಜನಸಾಮಾನ್ಯರೊಂದಿಗೆ ನೇರ ಸಂವಾದ, ಅವರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವ ಮನೋಭಾವ ಮತ್ತು ಆಡಳಿತವನ್ನು ಜನರ ಬಳಿಗೆ ಕೊಂಡೊಯ್ಯುವ ತಮ್ಮ ಪ್ರಯತ್ನಗಳು ತಮಗೆ "ಜನನಾಯಕ” ಎಂಬ ಗೌರವವನ್ನು ತಂದುಕೊಟ್ಟಿರುವುದು ಜನಮಾನಸದಲ್ಲಿ ಹಚ್ಚ ಹಸಿರಾಗಿ ಉಳಿದಿರುತ್ತದೆ.
ರಾಜ್ಯದಲ್ಲಿ ಆಡಳಿತ ನಡೆಸಿದ ದೀರ್ಘಾವಧಿ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಯನ್ನು 2026 ರಲ್ಲಿ ಮಹತ್ವದ ಮೈಲುಗಲ್ಲು ಸ್ಥಾಪಿಸಿರುವುದರ ಮೂಲಕ ಹೆಚ್ಚು ಕಾಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸುತ್ತಿರುವ ಕರ್ನಾಟಕ ರಾಜ್ಯದ ರಾಜಕೀಯ ಹಾಗೂ ಆಡಳಿತ ಇತಿಹಾಸದಲ್ಲಿ ನಿಮ್ಮದೇ ಆದ ವಿಶಿಷ್ಟ ಸ್ಥಾನವನ್ನು ಪಡೆದಿರುವ ತಮಗೆ, ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿಗಳಾದ ಬಸವರಾಜ ಎಂ ಹೊರಟ್ಟಿ ಅವರು ಸದನದ ಎಲ್ಲಾ ಸದಸ್ಯರ ಪರವಾಗಿ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಗೌರವಪೂರ್ಣ ವಂದನೆಗಳನ್ನು ಸಲ್ಲಿಸುವುದಾಗಿ ತಿಳಿಸಿದ್ದಾರೆ.
ಮುಂದಿನ ದಿನಗಳಲ್ಲಿಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಪಾರ ಅನುಭವ, ದೂರದೃಷ್ಟಿಯ ನಾಯಕತ್ವ ಮತ್ತು ಜನಪರ ಬದ್ಧತೆ ಕರ್ನಾಟಕ ರಾಜ್ಯವನ್ನು ಇನ್ನಷ್ಟು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಸಲಿ ಎಂದು ಶುಭ ಹಾರೈಸಿದ್ದಾರೆ.